ಇನ್ನೊಂದು ಅಕ್ಷರಂಗಳ

"ಹರಿವ ಲಹರಿ"ಯ ಹಾದಿ->->->

ಹೀಗೊಂದು ಯೋಚನೆ:

*ಪರಿಪೂರ್ಣತೆಯೆಂದರೆ ಮುಕ್ತಾಯ; ಹಾದಿಯ ಕೊನೆ.*

Monday 28 April, 2008

ನಮ್ಮ-ನಿಮ್ಮೊಳಗೆ-೦೨

ಸಂದೇಹ-೦೧: ಫೋನಿನಲ್ಲಿ, ಗೆಳತಿಯೊಬ್ಬಳಿಂದ:
"ರೆಗ್ರೆಷನ್ನಿಗೆ ಒಳಗಾದ ವ್ಯಕ್ತಿಗೆ ಹಿಂದಿನ ಯಾವುದೋ ಜನ್ಮದ ತನ್ನ ಬಂಧುವಿನ (ಮಗುವಿನ, ಪತಿ/ಪತ್ನಿಯ) ಸ್ಮೃತಿಯಿಂದ ಈ ಜನ್ಮದಲ್ಲೂ ಆ ವ್ಯಕ್ತಿಯ ಮೇಲೆ (ಆ ವ್ಯಕ್ತಿ ಬೇರೆ ಯಾರದೋ ಮನೆಯಲ್ಲಿ, ಬೇರೊಂದು ಬಂಧನದಲ್ಲಿ ಈಗ ಹುಟ್ಟಿದ್ದರೂ) ಮಮಕಾರ, ಪ್ರೀತಿ ಬರಲಾರದೆ? ಬಂದರೆ ಅದು ಸರಿಯೆ?"

ಪ್ರತಿಕ್ರಿಯೆ: ಯಾವುದೋ ಜನ್ಮದ ಬಂಧನ ಈ ಜನ್ಮದಲ್ಲಿ ನೆನಪಾಗಿ ಅದನ್ನರಸಿ ಹೋಗಿ ಈ ಜನ್ಮದಲ್ಲೂ ಒಂದಾಗುವ ಕಥೆಗಳು ನಮ್ಮಲ್ಲಿ ಬಳಕೆಯಲ್ಲಿವೆ. ಹಾಗಂತ ಅದು ಎಲ್ಲ ಸಂದರ್ಭಗಳಲ್ಲೂ ಸರಿ ಅಂತಲ್ಲ. ವ್ಯಕ್ತಿಗಳಿಬ್ಬರೂ ಈ ಜನ್ಮದಲ್ಲಿ ಬೇರೆ ಬಾಂಧವ್ಯದಲ್ಲಿ ಇಲ್ಲದಿದ್ದಾಗ ಅದು ಸುಸೂತ್ರವಾಗಿ ನಡೆಯಬಹುದು, ಸರಿಯೂ ಆಗಬಹುದು. ಆದರೆ ಇಬ್ಬರಿಗೂ ಪ್ರಸ್ತುತ ಜನ್ಮದ ಬೇರೆ ಬಾಂಧವ್ಯಗಳಿದ್ದರೆ ಆಗ ಅದು ಸರಿಯಾಗಲಾರದು. ಇನ್ನು ಕಾಲ್ಪನಿಕ ಕಥೆಗಳಲ್ಲಿ ಇದಕ್ಕೆ ಬೇರೆ ಬೇರೆ ಆಯಾಮಗಳು ದೊರಕಿವೆ, ಅದನ್ನು ಇಲ್ಲಿ ಚರ್ಚಿಸುವುದಿಲ್ಲ. ಅದು ಕಲ್ಪನೆ-ಸತ್ಯಗಳ ಮಿಶ್ರಣ; ಅದೇ ಪೂರ್ಣ ಸತ್ಯ ಅಲ್ಲವಲ್ಲ!

ವ್ಯಕ್ತಿ ರೆಗ್ರೆಷನ್ನಿಗೆ ಒಳಗಾದ ಸಂದರ್ಭವೂ ಪ್ರಸ್ತುತವೆನಿಸುತ್ತದೆ. ಯಾವುದೋ ತೊಂದರೆಗೆ ಉತ್ತರ ಹುಡುಕುತ್ತಾ ಸಮ್ಮೋಹನದಲ್ಲಿ ಪೂರ್ವಸ್ಮೃತಿಯನ್ನು ಅರಸಿದರೆ, ಆಗ ಅಂಥ ಸ್ಮೃತಿಯಲ್ಲಿ ಯಾವುದೋ ಒಂದು ಚಿಕಿತ್ಸಕ ಗುಣವಿದ್ದೇ ಇರುತ್ತದೆ. ಅಂಥ ಸ್ಮೃತಿಯನ್ನು ಚಿಕಿತ್ಸಕವಾಗಿ "ಕಾಣಿಸುವುದು" ಚಿಕಿತ್ಸಕನ ಕೆಲಸ; ಧರ್ಮ. ಇದರ ಹೊರತಾಗಿಯೂ ಸಮ್ಮೋಹಿತ ವ್ಯಕ್ತಿಗೆ ಹಿಪ್ನಾಟಿಕ್ ಟ್ರಾನ್ಸ್ ಬಿಟ್ಟು ಮಾಮೂಲು ಸ್ಥಿತಿಗೆ ಬಂದಾಗಲೂ ಸ್ಮೃತಿಯ ಬಂಧನವೇ ಕಾಡುತ್ತಿದ್ದರೆ ಮತ್ತು ಆ ವ್ಯಕ್ತಿ ಸಾಮಾಜಿಕವಾಗಿ ಈ ಹೊಸ ಬಂಧನಕ್ಕೆ ಒಳಗಾಗುವ ಸ್ಥಿತಿಯಲ್ಲಿರದಿದ್ದರೆ, ಅದಕ್ಕೆ ಸೂಕ್ತ ಸಲಹೆಗಳನ್ನು ಕೊಟ್ಟು ಸರಿಯಾದ ದೃಷ್ಟಿಕೋನದೆಡೆ ನಡೆಸುವುದು ಚಿಕಿತ್ಸಕನ ಜವಾಬ್ದಾರಿ. ಆದರೆ, ಇಂಥ ಪೀಕಲಾಟದ ಸಂದರ್ಭಗಳು ಎದುರಾದದ್ದನ್ನು ನಾನು ಇದುವರೆಗೆ ಓದಿಲ್ಲ, ನನ್ನ ತಿಳುವಳಿಕೆಗೆ ಬಂದಿಲ್ಲ. ಬಹುತೇಕ ಸಂದರ್ಭಗಳಲ್ಲಿ ಆ ಇಬ್ಬರೂ ವ್ಯಕ್ತಿಗಳು ಈ ಜನ್ಮದಲ್ಲೂ ಬಂಧುಗಳಾಗಿಯೇ ಇದ್ದಿರುವ ಅಥವಾ ಮುಂದೆ ಬಂಧುಗಳಾಗುವ ಸಾಧ್ಯತೆ ಇದ್ದುದೇ ಹೆಚ್ಚು.

ಇನ್ನು, ಯಾರಿಗಾದರೂ ಆಕಸ್ಮಿಕವಾಗಿ ಕನಸಿನಲ್ಲಿ ಅಂಥ ಪೂರ್ವಸ್ಮೃತಿ ನೆನಪಿಗೆ ಬಂದು ಹಿಂದಿನ ಜನ್ಮದ ವ್ಯಕ್ತಿಯೆಡೆ ಬಾಂಧವ್ಯ ಉಂಟಾದರೆ ಅದಕ್ಕೆ ಅತೀಂದ್ರಿಯ ನೆಲೆಯಲ್ಲಿ ಪ್ರಸ್ತುತ ಬದುಕಿಗೆ ಹೊಂದುವಂತೆ ಯಾವುದೋ ಅಗತ್ಯತೆಯ ಯಾ ಕಲಿಕೆಯ ಕಾರಣವಿದ್ದೀತು. ಕಾರ್ಯ-ಕಾರಣ ಸಂಬಂಧವಿಲ್ಲದೆ ಅತೀಂದ್ರಿಯ ನೆಲೆಯಲ್ಲಿ ಯಾವುದೂ ನಡೆಯಲಾರದು ಅನ್ನುವುದು ನನ್ನ ನಂಬಿಕೆ. ಇವಲ್ಲದೆ, ಸುಮ್ಮ-ಸುಮ್ಮನೇ ಯಾರಿಗೋ ಯಾರ ಮೇಲೋ ಮಮಕಾರ ಉಂಟಾಗದು. ಅವೆಲ್ಲಕ್ಕೂ ಯಾವುದೋ ಒಂದು ತಿಳಿಯದ ಕಾರಣವಿದ್ದೇ ಇರುತ್ತದೆ. ಆ ಕಾರಣದ ಹುಡುಕಾಟವೇ ಕಲಿಕೆಯ, ತಿಳಿವಿನ ಆಕಾಂಕ್ಷೆಯ ಮೂಲ ಅನ್ನುವುದೂ ನನ್ನ ನಂಬಿಕೆ.

ರಿಗ್ರೆಷನ್ ಸಂದರ್ಭದಲ್ಲಿ ಚಿಕಿತ್ಸಕನ ಜವಾಬ್ದಾರಿ ಹೆಚ್ಚು. ರಿಗ್ರೆಷನ್ನಿಗೆ ಒಳಗಾದ ವ್ಯಕ್ತಿ ಆ ಸಂದರ್ಭದಲ್ಲಿ ಮಾನಸಿಕ ತುಮುಲಗಳಿಗೆ ಒಡ್ಡಿಕೊಂಡಿರುತ್ತಾರೆ. ಆಯಾಯ ನೆನಪಿನ (ಬಾಲ್ಯದ ಅಥವಾ ಪೂರ್ವ ಜನ್ಮದ) ಅನುಭವಗಳನ್ನು ಈಗಲೇ ಎಂಬಂತೆ `ಅನುಭವಿಸು'ತ್ತಿರುತ್ತಾರೆ. ಅದನ್ನು ಸರಿಯಾಗಿ ತಿಳಿದು ನಾಜೂಕುತನದಿಂದ ನಿಭಾಯಿಸುವ ಚಾಕಚಕ್ಯತೆ ಚಿಕಿತ್ಸಕರಿಗಿರಬೇಕು. ಹಾಗಿಲ್ಲದಿದ್ದಲ್ಲಿ, ರೆಗ್ರೆಷನ್ ಥೆರಪಿಯಿಂದ ಉಪಯೋಗಕ್ಕಿಂತಲೂ ತೊಂದರೆಗಳೇ ಆದಾವು.


ಸಂದೇಹ-೦೨: ವೀಣಾ ಶಿವಣ್ಣ ಅವರಿಂದ:
"ಬಹಳಷ್ಟು ಸಾರಿ ನನ್ನ ಅನುಭವಕ್ಕೆ ಬಂದಂತೆ, ಕೆಲವೊಂದು ಸಂದರ್ಭಗಳಲ್ಲಿ, ಕೆಲವು ಘಟನೆಗಳು ನಡೆದಾಗ, `ಇದು ಹಿಂದೊಮ್ಮೆ ಎಲ್ಲಿಯೋ ಹೀಗೆಯೇ ನಡೆದಿತ್ತು' ಅನ್ನುವ ಗಾಢ ಭಾವನೆ ಬರುತ್ತದೆ. ಅದರ ಬಗ್ಗೆ ನಾನು ಕನಸು ಕಂಡಿರಬಹುದು, ಗೊತ್ತಿಲ್ಲ. ಆದರೆ, ಎಲ್ಲಿ, ಯಾವಾಗ ಆ ಘಟನೆ ನಡೆದಿತ್ತು ಅನ್ನುವುದನ್ನು ನೆನಪಿಸಿಕೊಳ್ಳಲಾರೆ. ಇದಕ್ಕೆ ಏನನ್ನುತ್ತಾರೆ? ನನಗೊಬ್ಬಳಿಗೇ ಹೀಗೆ ಆಗುತ್ತಿದೆಯೆ?"

ಪ್ರತಿಕ್ರಿಯೆ: ಇಂಥ ಪ್ರಶ್ನೆಗಳನ್ನು ಬಹಳಷ್ಟು ಸಾರಿ ಕೇಳಿದ್ದೇನೆ, ನಾನೂ ಅನುಭವಿಸಿದ್ದೇನೆ. ಎಲ್ಲಿಯೋ ಪಯಣಿಸಿದಾಗ, "ಇಲ್ಲಿ ಬಂದಿದ್ದೆ" ಅನ್ನುವ ಭಾವನೆ; ಯಾರೊಡನೆಯೋ ಮಾತಾಡುವಾಗ (ಅವರೊಂದಿಗೆ ಮೊದಲ ಭೇಟಿಯೇ ಆಗಿರಲಿ), "ಇವೇ ಮಾತುಗಳನ್ನು, ಹೀಗೇ, ಹಿಂದೊಮ್ಮೆ ಮಾತಾಡಿದ್ದೆವು, ಇದೇ ವ್ಯಕ್ತಿಯೊಡನೆ. ಈಗ ಅವರ ಉತ್ತರ ಇಂಥದ್ದೇ ಆಗಿರುತ್ತದೆ" ಅನ್ನುವ ಯೋಚನೆ; ಯಾವ-ಯಾವುದೋ ವ್ಯಕ್ತಿಗಳು- ಮೊದಲು ಕಂಡಿರದಿದ್ದರೂ- ಭೇಟಿಯಾದಾಗ ತೀರಾ ಚಿರಪರಿಚಿತರು ಅನ್ನಿಸುವ ಭಾವನೆ-- ಇವೆಲ್ಲವನ್ನೂ ಇಂಗ್ಲಿಷಿನಲ್ಲಿ "ದೇ-ಜ-ವೂ" ಅನ್ನುತ್ತಾರೆ. ಇದು ಮಾಮೂಲು ಅನ್ನಬಹುದಾದಷ್ಟು ಮಾಮೂಲು "ಫಿನಾಮೆನಾ". ನಮಗಿದು ಪೂರ್ವಜನ್ಮದ ಸ್ಮೃತಿಯಿರಬಹುದು (ಸ್ಥಳದ, ವ್ಯಕ್ತಿಯ ಪರಿಚಿತ ಭಾವನೆ), ಅಥವಾ ಕನಸಲ್ಲೂ ಇರಬಹುದು (ಮಾತುಕತೆಗಳ ಸಂದರ್ಭಗಳು), ಅಥವಾ ಎರಡೂ.

ಕುತೂಹಲ ಜಾಸ್ತಿಯಿದ್ದರೆ, ಕಂಡುಹಿಡಿಯ"ಬಹುದು"... ಎಲ್ಲ ಕನಸುಗಳ, ನೆನಪುಗಳ ಟಿಪ್ಪಣಿ ಬರೆಬರೆದು ಇಡುತ್ತಾ ಹೋದರೆ ಅಲ್ಲೊಂದು ಇಲ್ಲೊಂದು ಕೊಂಡಿಗಳು ಸಿಗುತ್ತವೆ. ಸಣ್ಣ-ಸಣ್ಣ ಕೊಂಡಿಗಳನ್ನು ಕೂಡಿಸಿ ಒಂದು ಅಂದಾಜು ಚಿತ್ರಣ ಪಡೆಯಬಹುದು. ಅಷ್ಟೊಂದು ಕುತೂಹಲ ನನಗಿನ್ನೂ ಹುಟ್ಟಿಲ್ಲ, ನಾನು ಮಾಡುತ್ತಿಲ್ಲ; ಅಷ್ಟೇ.


ಸಂದೇಹ-೦೩: ನಾವಡರಿಂದ:
"ಡಿಪ್ರೆಶನ್ ಅನ್ನೋದು ಮನಸ್ಸಿನ ಯಾವ ಸ್ಥಿತಿ?"

ಪ್ರತಿಕ್ರಿಯೆ: ಡಿಪ್ರೆಶನ್ ಅನ್ನುವುದನ್ನು ಮಾನಸಿಕ ತಜ್ಞರು (ಸೈಕಾಲಜಿಸ್ಟ್, ಸೈಕಿಯಾಟ್ರಿಸ್ಟ್, ಸೈಕೋಥೆರಪಿಸ್ಟ್), ಅಲೋಪಥಿ ವೈದ್ಯರು, ಮತ್ತು ಸಮ್ಮೋಹನ-ಚಿಕಿತ್ಸಕರು ಬೇರೆ ಬೇರೆ ರೀತಿಯಲ್ಲಿ ವಿವರಿಸುತ್ತಾರೆ. ಮಾನಸಿಕ ತಜ್ಞರ ಪ್ರಕಾರ ಅದು ಸೈಕೋ-ನ್ಯೂರಾಟಿಕ್ ಅಥವಾ ಸೈಕೋ-ಸೊಮ್ಯಾಟಿಕ್ (ಮನೋ-ದೈಹಿಕ) ಖಾಯಿಲೆ. ವೈದ್ಯರ ಪ್ರಕಾರ ಅದು ಮಾನಸಿಕ (ಸೈಕಲಾಜಿಕಲ್) ಖಾಯಿಲೆ. ಇವರಿಬ್ಬರೂ ಈ ಖಾಯಿಲೆಗಾಗಿ ದೀರ್ಘಕಾಲಿಕ ನಿವಾರಣಾತಂತ್ರಗಳನ್ನು, ಮದ್ದನ್ನು ಸೂಚಿಸುತ್ತಾರೆ. ಅವರ ಪ್ರಕಾರ ಇದು ಸಂಪೂರ್ಣ ಗುಣವಾಗದ, ಪದೇ ಪದೇ ಬರಬಹುದಾದ, ಗುಳಿಗೆರೂಪದಲ್ಲಿ ಮದ್ದು ಬೇಕೇಬೇಕಾದ "ಖಾಯಿಲೆ". ಹಿಪ್ನಾಟಿಕ್ ಥೆರಪಿಸ್ಟ್ ಪ್ರಕಾರ ಅದೊಂದು ಸ್ಥಿತಿ; ಹಲವಾರು ತೊಂದರೆಗಳ ಮೊತ್ತದಿಂದ ಉಂಟಾಗುವ ಸ್ಥಿತಿ; ಪರಿಹರಿಸಲ್ಪಡುವ, ಬದಲಾವಣೆಗೆ ಒಗ್ಗುವ ಸ್ಥಿತಿ.

ಸಾಮಾನ್ಯವಾಗಿ ನಮ್ಮ ಮನಸ್ಸು ಒತ್ತಡಕ್ಕೆ ಸಿಲುಕಿದಾಗ ಅದರಿಂದ ಹೊರಬರುವ ದಾರಿಗಳನ್ನು ತಾನೇ ಹುಡುಕಿಕೊಳ್ಳುತ್ತದೆ. ಕೆಲವೊಮ್ಮೆ, ಒತ್ತಡ ಅತಿಯಾದಾಗ ಅಥವಾ ಒತ್ತಡದ ಪರಿಸ್ಥಿತಿಯಿಂದ ಹೊರಬರುವ ದಾರಿ ಕಾಣದಾದಾಗ ಅಥವಾ ಒತ್ತಡ ತನಗೆ ತಾನೇ ತಂದುಕೊಂಡದ್ದಾದಾಗ (ಸೆಲ್ಫ್ ಇಂಪೋಸ್ಡ್ ಸ್ಟ್ರೆಸ್- "ಇತರರ ಬಗ್ಗೆ ತಾವೇ ಜವಾಬ್ದಾರರು, ಮನೆಯವರೆಲ್ಲರ ಯಾ ಸಹವರ್ತಿಗಳ ನಡವಳಿಕೆಗಳಿಗೆ, ಹಿತಾಸಕ್ತಿಗೆ ತಾವೊಬ್ಬರೇ ಹೆಗಲಾಸರೆ, ಮಾನದಂಡ, ಯಾ ಧರ್ಮದರ್ಶಿ" ಅನ್ನುವಂಥ ಮನೋಧರ್ಮ ಇದ್ದಾಗ) ಮನಸ್ಸು ಮುದುಡುತ್ತದೆ (ಇವು ಕೆಲವು ಉದಾಹರಣೆ ಮಾತ್ರ). ಅಂಥ ಮನಸ್ಸು ಕಾಲಕ್ರಮೇಣ ಎಲ್ಲದರಲ್ಲೂ ಕೆಡುಕನ್ನು, ಹುಳುಕನ್ನು, ಕತ್ತಲನ್ನು ಕಾಣಲು ತೊಡಗುತ್ತದೆ. ಎಲ್ಲವೂ ಅರ್ಥಹೀನವೆನಿಸಬಹುದು. ಜೀವನ ನೀರಸವೆನಿಸಬಹುದು. ಅಂಥ ಮನಸ್ಥಿತಿಯನ್ನು ಸಾಮಾನ್ಯವಾಗಿ ಡಿಪ್ರೆಶನ್ ಅನ್ನುತ್ತಾರೆ. ಈ ನೀರಸ ಮನಸ್ಥಿತಿ ಹೆಚ್ಚಿದಂತೆ, ಆಶಾಭಾವನೆ ತಗ್ಗಿದಂತೆ, ಜೀವನದ ಅರ್ಥವ್ಯಾಪ್ತಿ ಕುಗ್ಗಿದಂತೆ ಆತ್ಮಹತ್ಯೆಯಂಥ ನೇತ್ಯಾತ್ಮಕ ತುಡಿತ (ನೆಗೆಟಿವ್ ಇಂಪಲ್ಸ್) ಹುಟ್ಟಬಹುದು, ಹೆಚ್ಚಬಹುದು. ಹೀಗೆ ವ್ಯಕ್ತಿ ಡಿಪ್ರೆಶನ್ನಿಗೆ ಒಳಗಾದಾಗ ಮೆದುಳಿನಲ್ಲಿ ರಾಸಾಯನಿಕ ಕ್ರಿಯೆಗಳೂ ಸ್ವಲ್ಪ ಏರುಪೇರಾಗಿ ಗೊಂದಲ ಏರ್ಪಡುತ್ತದೆ. ಅದಕ್ಕಾಗಿಯೇ ವಿಧವಿಧವಾದ ಗುಳಿಗೆ-ಮಾತ್ರೆಗಳು ಲಭ್ಯವಿವೆ. ಆದರೆ ಅವೆಲ್ಲವೂ ವ್ಯಕ್ತಿಯನ್ನು ತನ್ನ "ಹಿಡಿತ"ದೊಳಗೆ ಇರಿಸಿಕೊಳ್ಳುತ್ತವೆ- ಅರ್ಥಾತ್ "ಅಡಿಕ್ಟಿವ್" ಆಗಿವೆ.

ಮಾತ್ರೆ-ಗುಳಿಗೆಗಳ ಬದಲಾಗಿ, ಅಂಥ ಸಂದರ್ಭಗಳಲ್ಲಿ ಸಹವರ್ತಿಗಳ ಪ್ರೀತಿ, ವಿಶ್ವಾಸಪೂರ್ಣ ನಡವಳಿಕೆ, ಉತ್ಸಾಹಭರಿತ ಸಾಹಚರ್ಯ, ಒಡನಾಟ, ಅತೀ ಅವಶ್ಯಕ. ಬಹಳಷ್ಟು ಆತ್ಮಹತ್ಯೆಗಳಿಗೆ ಇಂಥ ನೇತ್ಯಾತ್ಮಕ ಮನೋಸ್ಥಿತಿಯೇ ಕಾರಣವಾಗಿರುತ್ತದೆ. ನಿಮಗೆ ಈ ರೀತಿಯ ಮನಸ್ಥಿತಿಯಲ್ಲಿರುವ ಯಾರದ್ದಾದರೂ ಪರಿಚಯವಿದ್ದರೆ ಅವರೊಂದಿಗೆ ಸ್ನೇಹ-ಪ್ರೀತಿಯಿಂದ ನಡೆದುಕೊಳ್ಳಿ. ಜೀವನ ದುರಂತಮಯವಲ್ಲ ಎಂದು ತಿಳುವಳಿಕೆ ಮೂಡಿಸಲು ಪ್ರಯತ್ನಪಡಿ. ಅವರ ತೊಂದರೆ-ಒತ್ತಡದ ಮೂಲ ತಿಳಿಯಲು ಪ್ರಯತ್ನಿಸಿ, ಅದಕ್ಕೆ ಪರಿಹಾರ ಹುಡುಕಲು ಸಹಕರಿಸಿ. ಒಂದು ಘಟನೆಗೆ, ಪರಿಸ್ಥಿತಿಗೆ, ವಾತಾವರಣಕ್ಕೆ ಅನೇಕ ಮುಖಗಳಿವೆ ಅನ್ನುವುದನ್ನು ಮನವರಿಕೆ ಮಾಡಿಸಿ. ನೇತ್ಯಾತ್ಮಕವನ್ನು ಇತ್ಯಾತ್ಮಕ (ಪೊಸಿಟಿವ್ ಥಿಂಕಿಂಗ್) ಆಗಿಸಲು ಪ್ರಯತ್ನಿಸಿ. ಅವರನ್ನು ಸದಾ ಹಿತವಾದ ಚಟುವಟಿಕೆಯಲ್ಲಿರಿಸಿ, ಒಂಟಿಯಾಗಿರಲು ಬಿಡಬೇಡಿ.

Wednesday 23 April, 2008

ನಮ್ಮ-ನಿಮ್ಮೊಳಗೆ... ೦೧

ಓದುಗರೇ,
ಈ ಅಂಗಳ ನನ್ನ ಅಕ್ಷರಗಳ ಬಿತ್ತರಕ್ಕೆ ಸೀಮಿತವಾಗಿ ನಿಂತಿತ್ತು ಇಷ್ಟು ದಿನ. ಈಗ ಇದನ್ನು ಇನ್ನೊಂದು ಹೆಜ್ಜೆ ಮುಂದಕ್ಕೆ ಒಯ್ಯುವ ಪ್ರಯತ್ನ ಮಾಡುತ್ತಿದ್ದೇನೆ, ಅದಕ್ಕೆ ನಿಮ್ಮೆಲ್ಲರ ಸಹಕಾರ, ಉತ್ಸಾಹ ಮುಖ್ಯ.

ಇದುವರೆಗೆ ಹಲವಾರು ಕ್ಷೇತ್ರಗಳಲ್ಲಿ ಕಲಿಕೆಯ ಉದ್ದೇಶದಿಂದ ತೊಡಗಿಸಿಕೊಂಡಿದ್ದೆ. ಅಲ್ಲೆಲ್ಲ ಸಿಕ್ಕ ಅಲ್ಪ-ಸ್ವಲ್ಪ ತಿಳುವಳಿಕೆಗಳನ್ನು ನಿಮ್ಮೆಲ್ಲರೊಡನೆ ಹಂಚಿಕೊಳ್ಳುವ ಯೋಚನೆ-ಯೋಜನೆ ಇದು.

Psychology, Hypnosis/ Hypnotherapy, Regression/ Regression to past life as therapy, General Physical Fitness, Nutrition- ಈ ವಿಷಯಗಳ ಬಗ್ಗೆ ಪ್ರಶ್ನೋತ್ತರದ ರೀತಿಯಲ್ಲಿ ಮಾಹಿತಿ-ಸಂವಹನ ಇಲ್ಲಿ ನಡೆಯಲಿ. ನಿಮ್ಮ ಪ್ರಶ್ನೆಗಳಿಗೆ, ಸಂಬಂಧಪಟ್ಟ ಮಾಹಿತಿಗಳಿಗೆ ಈ ಅಂಗಳ ತೆರೆದುಕೊಳ್ಳುತ್ತಿದೆ.

ಬನ್ನಿ, ಓಡಾಡಿ, ಓದ್ಯಾಡಿ...

ಪ್ರತಿಕ್ರಿಯೆ-೦೧:

ಸುನಾಥರ ಸಂದೇಹ:
Regression ಬಗೆಗೆ ನನಗೊಂದು ಮೂಲಭೂತ ಸಂದೇಹವಿದೆ. Regression ಆದಾಗ ಎರಡು ಸಾಧ್ಯತೆಗಳು ನನಗೆ ಕಾಣುತ್ತವೆ:
೧ನೆಯ ಸಾಧ್ಯತೆ: Regressionಗೆ ಒಳಗಾದ ವ್ಯಕ್ತಿ ತನ್ನ ಪೂರ್ವಜನ್ಮದ ಘಟನೆಗಳನ್ನು ನೆನಪಿಸಿಕೊಳ್ಳುವನು.
೨ನೆಯ ಸಾಧ್ಯತೆ: ಗತಕಾಲದ ಎಲ್ಲ ಘಟನೆಗಳು ಅಭೌತಿಕ spaceನಲ್ಲಿ ತೇಲುತ್ತಿದ್ದು, regression ಆದ ವ್ಯಕ್ತಿ,ಈ ಘಟನೆಗಳಿಗೆ tune ಆದರೆ, ಅವು ತನ್ನವೇ ಅನುಭವ ಎಂದು ಭಾವಿಸಬಹುದು.

ಆದುದರಿಂದ, ಯಾವುದು ನಿಜವಿರಬಹುದೆನ್ನುವದರ ಬಗೆಗೆ verification ಅಥವಾ validation ಮಾಡಲು ಸಾಧ್ಯವೆ? ಆ ತರಹ ಮಾಡಲಾಗಿದೆಯೆ?

ಪ್ರತಿಕ್ರಿಯೆ:
ರೆಗ್ರೆಷನ್ ಅನ್ನುವ ಪದದ ಸಾಮಾನ್ಯ ಅರ್ಥ, ಸಮ್ಮೋಹನಕ್ಕೆ ಸಂಬಂಧಪಟ್ಟಂತೆ, "ಪೂರ್ವ ಸ್ಮೃತಿ" ಎಂದಷ್ಟೇ. ಅದು ಪೂರ್ವ ಜನ್ಮದ್ದಾಗಿರಲಿ, ಬಾಲ್ಯದ್ದಾಗಿರಲಿ, ಅಥವಾ ನಿನ್ನೆಯ ಸಂಜೆಯಷ್ಟೇ ತಿಂದ ವಿಶಿಷ್ಠ ತಿಂಡಿಯದ್ದಾಗಿರಲಿ- ಇವೆಲ್ಲವೂ ಪೂರ್ವ ಸ್ಮೃತಿಗಳೇ. ಇವನ್ನೆಲ್ಲ ನೆನಪಿಸಿಕೊಳ್ಳುವುದೂ ರೆಗ್ರೆಷನ್ ಎಂದೇ ಪರಿಗಣಿತ.

ನಮ್ಮ ಆಗಿಂದಾಗಿನ ನೆನಪುಗಳು ಸುಮಾರು ಇಪ್ಪತ್ನಾಲ್ಕು ಘಂಟೆಗಳವರೆಗೆ, ಅಥವಾ ನಾವು ಒಮ್ಮೆ ನಿದ್ರಿಸುವವರೆಗೆ ನಮ್ಮ ಜಾಗೃತಪ್ರಜ್ಞಾವಲಯದಲ್ಲಿ (`ಕಾನ್ಷಿಯಸ್ ಮೈಂಡ್'ನಲ್ಲಿ) ಇರುತ್ತವೆ. ನಿದ್ರಿಸಿದ ಹೊತ್ತಿಗೆ (ಅಥವಾ ಇಪ್ಪತ್ನಾಲ್ಕು ಘಂಟೆಗಳ ಬಳಿಕ) ಅವು ನಮ್ಮ ಕ್ರಿಟಿಕಲ್ ಮೈಂಡ್ ದಾಟಿಕೊಂಡು ಸುಪ್ತಮನಸ್ಸಿನ (ಸುಪ್ತಪ್ರಜ್ಞೆಯ, ಸಬ್-ಕಾನ್ಷಿಯಸ್ ಮೈಂಡಿನ) ಪದರಕ್ಕೆ ಸೇರುತ್ತವೆ. ನಮ್ಮೆಲ್ಲಾ ನೆನಪುಗಳು, ಪೂರ್ವ ಸ್ಮೃತಿಗಳು ಈ ಸುಪ್ತಪ್ರಜ್ಞೆಯ ಪದರಗಳಲ್ಲೇ ಹುದುಗಿರುತ್ತವೆ. ಇದರ ಆಳದ ಪದರಗಳನ್ನೇ ಅತೀಂದ್ರಿಯ ಪ್ರಜ್ಞೆ (ಸೂಪರ್ ಕಾನ್ಷಿಯಸ್) ಅನ್ನಬಹುದು. ಅತ್ಯಂತ ಹಿಂದಿನ ನೆನಪುಗಳು, ಪೂರ್ವಜನ್ಮದವೂ ಸಹ, ಇಲ್ಲೇ ಹುದುಗಿರುತ್ತವೆ ಅನ್ನುತ್ತಾರೆ ಡಾ. ವೈಸ್, ಡಾ. ನ್ಯೂಟನ್, ಓರ್ಮಂಡ್, ಗಿಲ್ ಬೋಯ್ನ್, ಮತ್ತಿತರರು. ಈ ತರ್ಕಗಳೇ, ಸುನಾಥ ಕಾಕಾ, ನಿಮ್ಮ ಮೊದಲ ಸಂದೇಹಕ್ಕೆ ಉತ್ತರ.

ಇನ್ನು ಎರಡನೇ ಸಂದೇಹದ ಬಗ್ಗೆ- ಖಚಿತವಾಗಿ ಯಾವುದೇ ಸಂಭವನೀಯ ಸಾಧ್ಯತೆಗಳು ನನಗೆ ಕಂಡಿಲ್ಲ. ನಾನು ಇದುವರೆಗೆ ಓದಿ ತಿಳಿದಂತೆ, ನಮ್ಮ ನಮ್ಮ ನೆನಪುಗಳು ನಮ್ಮವೇ.
ಆದರೆ.... ಒಬ್ಬ ವ್ಯಕ್ತಿ, ತನ್ನ ಪ್ರಜ್ಞಾವಲಯವನ್ನು ತುಂಬಾ ಸಶಕ್ತವಾಗಿಸಿಕೊಂಡು, ನಿರ್ಮಲವಾಗಿಸಿಕೊಂಡು, ಸಮ್ಮೋಹನ ಸ್ಥಿತಿಗೆ ಹೋದರೆ (ಋಷಿ-ಮುನಿಗಳ ಸಮಾಧಿ ಸ್ಥಿತಿ ಇದೇ), ಆಗ ಆ ವ್ಯಕ್ತಿಗೆ ವರ್ತಮಾನದೊಂದಿಗೆ ಭೂತ-ಭವಿಷ್ಯಗಳೂ ಅರಿವಿಗೆ ಬರುವ ಬಗ್ಗೆ ದಾಖಲೆಗಳಿವೆ. ನಮ್ಮ ವೇದಗಳು ಅಂಥ ಮಹಾತ್ಮರ ಕೊಡುಗೆ. ಪುರಾಣಗಳ ತುಂಬಾ ಅಂಥವರೇ ಇದ್ದಾರೆ. ಅಂದರೆ, ಸಮ್ಮೋಹಿತ ಸ್ಥಿತಿಯಲ್ಲಿ ಎಲ್ಲ ಭೌತಿಕ ನೆಲೆಗಳನ್ನೂ ಮೀರಿ, ಅಭೌತಿಕ ಮಟ್ಟದಲ್ಲಿ, "ಜಾಗತಿಕ ಪ್ರಜ್ಞಾವಲಯದಲ್ಲಿ" ಸಂಚರಿಸುವ ಆಂತರಿಕ ಶಕ್ತಿ ಪ್ರತಿಯೊಬ್ಬರಿಗೂ ಇದೆ. ಆಗ ಅವರು ಅಂಥ "ಕಾಣ್ಕೆ"ಗಳನ್ನು ತನ್ನ ಅನುಭವ ಅಂದುಕೊಳ್ಳಲಾರರು, ಅದು ನಿಜವಾಗಿಯೂ ಏನು ಅನ್ನುವ "ಅರಿವು" ಅವರಿಗಿರುತ್ತದೆ. ಅಂಥ ಶಕ್ತಿಯನ್ನು ಸ್ವಪ್ರಯತ್ನದಿಂದ, ಗುರು-ನಿರ್ದೇಶನದಿಂದ, ಅಧ್ಯಯನದಿಂದ, ಅರಿವಿನಿಂದ ಜಾಗೃತಗೊಳಿಸಿಕೊಳ್ಳಬಹುದು.

Tuesday 15 April, 2008

ಹಿಂದಿನ ಕಂತೆಗಳು- ಇಂದು ತೆರೆದಾಗ...೦೧

ಕೈಗೆತ್ತಿಕೊಂಡಿದ್ದ ಕಲಿಕೆಯನ್ನು ಒಂದು ಹಂತಕ್ಕೆ ತಂದು ನಿಲ್ಲಿಸಿಕೊಂಡ ಈ ಘಳಿಗೆಯಲ್ಲಿ, ಹಳೆಯ ತರಗತಿಗಳ, ಪಾಠಗಳ ಸಂದರ್ಭದಲ್ಲಿ ಬರೆದಿದ್ದ ಲೇಖನಗಳನ್ನು ನೋಡುತ್ತಿದ್ದಾಗ ಕಣ್ಣಿಗೆ ಬಿದ್ದದ್ದು ಇದು.
೨೦೦೨-ರ ಸೆಪ್ಟೆಂಬರಿಂದ ಡಿಸೆಂಬರ್ ತನಕ ಡಿ'ಆನ್'ಝಾ ಕಾಲೇಜಿನಲ್ಲಿ ಕಲಿತ "ಇಂಗ್ಲಿಷ್-೧-ಎ" ತರಗತಿಯ ಒಂದು ಅಸೈನ್'ಮೆಂಟ್- "Quotations on Education". ಒಟ್ಟು ಹತ್ತು ಪುಟಗಳ ನನ್ನ ಸಂಗ್ರಹದಿಂದ ಎರಡು ತುಣುಕುಗಳು ನಿಮ್ಮೆಲ್ಲರ ಅವಗಾಹನೆಗೆ....

M. K. Gandhi – On Education

"The ordinary meaning of education is a knowledge of letters. To teach boys reading, writing and arithmetic is called primary education. A peasant earns his bread honestly. He has ordinary knowledge of the world. He knows fairly well how he should behave towards his parents, his wife, his children and his fellow-villagers. He understands and observes the rules of morality. But he cannot write his own name. What do you propose to do by giving him a knowledge of letters? Will you add an inch to his happiness? Do you wish to make him discontented with his cottage or his lot? And even if you want to do that, he will not need such an education. Carried away by the flood of Western thought, we came to the conclusion, without weighing pros and cons, that we should give this kind of education to the people. This education has produced vacant minds and manufactured servants for the Government. The products of our universities have become nincompoops."


Jiddu Krishnamurthy – On Education

"Now modern education is developing the intellect, offering more and more explanations of life, more and more theories, without the harmonious quality of affection. Therefore we have developed cunning minds to escape from conflict; hence we are satisfied with explanations that scientists and philosophers give us. The mind- the intellect- is satisfied with these innumerable explanations, but intelligence is not, for to understand there must be complete unity of mind and heart in action. Until you really approach all of life with your intelligence, instead of merely with your intellect, no system in the world will save man from the ceaseless toil for bread."

Thursday 3 April, 2008

ಕೃತ್ತಿಕಾಳ ಕಥೆ

ಕೃತ್ತಿಕಾ, ಹತ್ತು ವರ್ಷದ ಹುಡುಗಿ. ಆಡುವ ವಯಸ್ಸಿಗೆ ಕೀಮೋಥೆರಪಿ. ಅವಳ ನೋವಿಗೆ ಹೆಗಲಾಗಿರುವುದು "ಆಸ್ಥೆ"ಯೆಂಬ ಹೆಸರಲ್ಲಿ ಹೆಜ್ಜೆಯಿಡುತ್ತಿರುವ ಸಹೃದಯ ಗೆಳೆಯರ ಗುಂಪು.

ಇಲ್ಲಿ ನೋಡಿ, ಸಹಾಯ ಹಸ್ತ ನೀಡಿ:



ಹೆಚ್ಚಿನ ವಿವರ, ಇತರ ಮಾಹಿತಿಗಳಿಗಾಗಿ:

http://jointhehands.blogspot.com/

ಕೈಗೆ ಕೈ ಜೋಡಿಸಿ, ಹೆಗಲಿಗೆ ಹೆಗಲಿತ್ತು
ನೆರವಿನ ಅರ್ಥ ಹೆಚ್ಚಿಸೋಣ.