ಇನ್ನೊಂದು ಅಕ್ಷರಂಗಳ

"ಹರಿವ ಲಹರಿ"ಯ ಹಾದಿ->->->

ಹೀಗೊಂದು ಯೋಚನೆ:

*ಪರಿಪೂರ್ಣತೆಯೆಂದರೆ ಮುಕ್ತಾಯ; ಹಾದಿಯ ಕೊನೆ.*

Monday 7 May, 2007

ಆತ್ಮ ಚಿಂತನ-೦೨

ಮನೋವೈದ್ಯರಿಬ್ಬರೂ (ಡಾ ನ್ಯೂಟನ್ ಮತ್ತು ಡಾ ವೈಸ್) ತಮ್ಮ ಗ್ರಾಹಕರನ್ನು ಸಮ್ಮೋಹನಕ್ಕೆ ಒಳಪಡಿಸುವ ಮೊದಲು ಸಂದರ್ಶನದ ಮೂಲಕ ಅವರ ಪರಿಸ್ಥಿತಿಯ ಪರಿಚಯ ಮಾಡಿಕೊಳ್ಳುತ್ತಾರೆ. ಬಹುತೇಕ ಗ್ರಾಹಕರು ಇತರ ವೈದ್ಯಕೀಯ ಮತ್ತು ಮನೋವೈಜ್ಞಾನಿಕ ಶುಶ್ರೂಷೆಯನ್ನು ಪಡೆಯಲು ಪ್ರಯತ್ನಿಸಿದವರೇ. ಅದರಿಂದ ಪ್ರಯೋಜನ ದೊರಕದೆ ಇವರಲ್ಲಿ ಬಂದವರು. ಡಾ ನ್ಯೂಟನ್ ತಮ್ಮ ಪುಸ್ತಕಗಳಲ್ಲಿ ಆತ್ಮದ ಸ್ವರೂಪ, ಆತ್ಮಗಳ ಲೋಕ, ಆತ್ಮಗಳ ಕಲಿಕೆ, ಮತ್ತು ಆತ್ಮ ಜ್ಞಾನದ ಹಂತಗಳನ್ನು ವಿವರಿಸುತ್ತಾರೆ. ಡಾ ವೈಸ್, ತಮ್ಮ ಗ್ರಾಹಕರಿಗೆ ಶಾಂತಿ ನೆಮ್ಮದಿ ಒದಗಿಸುವ "ರೆಗ್ರೆಷನ್ ಥೆರಪಿ"ಯನ್ನೇ ತಮ್ಮ ವೃತ್ತಿಯನ್ನಾಗಿಸಿಕೊಂಡಿದ್ದಾರೆ. ಶಿಬಿರಗಳನ್ನೂ ಸಾಮೂಹಿಕ ಕಾರ್ಯಾಗಾರಗಳನ್ನೂ ನಡೆಸುತ್ತಿದ್ದಾರೆ.

ಡಾ ನ್ಯೂಟನ್ ವಿವರಿಸುವಂತೆ, ನಮ್ಮ ಆತ್ಮ ಶಕ್ತಿ ಸ್ವರೂಪ. ಅದಕ್ಕೆ ಮುಖ, ಕಣ್ಣು-ಕೈ-ಕಾಲು, ದೇಹ... ಏನೂ ಇಲ್ಲ. ಬರೇ ಬೆಳಕಿನ ಪುಟ್ಟ ಗೋಳದಂಥಾದ್ದು. ನಮ್ಮ ಆತ್ಮದ ಜ್ಞಾನದ ಆಳವನ್ನವಲಂಬಿಸಿ ಆ ಬೆಳಕಿನ ಗೋಳದ ಬಣ್ಣವಿರುತ್ತದೆ. ಅನನುಭವಿ, ಮೊದಲ ಹಂತದ ಆತ್ಮ ಪೂರ್ಣ ಬಿಳಿ ಬಣ್ಣದ್ದಾದರೆ, ಹಂತ ಹಂತವಾಗಿ ಕಿತ್ತಳೆ, ಹಳದಿ, ಹಸುರು, ನೀಲಿ, ನೇರಳೆ ಬಣ್ಣಗಳವರೆಗಿನ ಆತ್ಮಗಳ ಅಸ್ತಿತ್ವ ಅವರ ಅನುಭವಕ್ಕೆ ಬಂದಿದೆಯಂತೆ. ಒಂದು ಆತ್ಮ ತನ್ನ ಭೌತಿಕ ದೇಹದಿಂದ ಹೊರಬಿದ್ದೊಡನೆ, ಆ ಆತ್ಮಗತ ಜ್ಞಾನವನ್ನು ಅವಲಂಬಿಸಿ, ಆತ್ಮಲೋಕ (ಸ್ಪಿರಿಟ್ ವರ್ಲ್ಡ್) ತಲುಪುತ್ತದೆ. ಕೆಲವು ಕಿರಿಯ/ಎಳೆಯ ಅಥವಾ ಅನನುಭವಿ ಆತ್ಮಗಳು ಗಲಿಬಿಲಿಗೊಂಡು ಭೂಮಿಯ ವಾಯುವಲಯದಲ್ಲೇ ಸುತ್ತುತ್ತಿರಬಹುದು. ಆಗ ಅಂಥಾ ಆತ್ಮದ ಗುರುಸ್ಥಾನದಲ್ಲಿರುವ ಆತ್ಮ, ಭೌತಿಕ ದೇಹದಲ್ಲಿದ್ದಾಗ ಹತ್ತಿರದ ಸಂಬಂಧಿಕರಾಗಿದ್ದವರ ಆತ್ಮ ಈ ಆತ್ಮವನ್ನು ಹದವಾದ ಸೆಳೆತಕ್ಕೊಳಪಡಿಸಿ ನಿಜನೆಲೆಯಾದ ಆತ್ಮಲೋಕದ ಕಡೆಗೆ ಕರೆಸಿಕೊಳ್ಳುತ್ತವೆ. ಸ್ವಲ್ಪ ಅನುಭವವಿರುವ ಆತ್ಮ (ಹಲವಾರು ಜನ್ಮಗಳನ್ನೆತ್ತಿದ ಆತ್ಮ, ಹಲವು ಬಾರಿ ವಿದೇಶಯಾತ್ರೆ ಮಾಡಿದವರಂತೆ) ತನ್ನ ಮನೆಯತ್ತ ತಾನೇ ಪಯಣಿಸುತ್ತದೆ. ಬಹುತೇಕ ಆತ್ಮಗಳು ಭೌತಿಕ ಸಾವಿನ ಬಳಿಕ "ಒಂದು ಬೆಳಕಿನ ಕೊಳವೆಯೊಳಗೆ ವೇಗವಾಗಿ ಪಯಣಿಸಿದ" ಅನುಭವ ಪಡೆಯುತ್ತವೆ.

ಡಾ ವೈಸ್ ತಮ್ಮ ಪುಸ್ತಕಗಳಲ್ಲಿ ಆತ್ಮಲೋಕದ ಬದಲಾಗಿ ಆತ್ಮಗಳ ಬಗೆಗೇ ತಿಳಿಸುತ್ತಾರೆ. ಗುರು/ಗೈಡ್ ಆತ್ಮಗಳ ಬಗ್ಗೆ ಬರೆಯುತ್ತಾರೆ. ಸಮ್ಮೋಹನದಲ್ಲಿರುವ ತಮ್ಮ ಗ್ರಾಹಕರು ಗೈಡ್ ನೀಡುವ ಸಂದೇಶಗಳನ್ನು ತಮಗರಿವಿಲ್ಲದೆಯೇ ಅರುಹುವುದನ್ನು ಬರೆಯುತ್ತಾರೆ. ಎರಡು ಜನ್ಮಗಳ ನಡುವೆ ಆತ್ಮ ಪುನಶ್ಚೇತನಗೊಳ್ಳುವ ಲೋಕದ ಬಗ್ಗೆ ಇಲ್ಲಿ ಹೆಚ್ಚು ಮಾತಿಲ್ಲ. ನಮ್ಮ ಹಿಂದಿನ ಜೀವನ ಹೇಗಿತ್ತು, ಮುಂದಿನದು ಹೇಗಿರಬಲ್ಲುದು ಎನ್ನುವುದರ ಸುತ್ತಲೇ ಅವರ ಕೆಲಸ. ಅವರ ಪ್ರಕಾರ ಎಲ್ಲ ಆತ್ಮಗಳೂ ಒಂದೇ; ಅನುಭವದ ಆಳಗಳು ಬೇರೆ ಬೇರೆ, ಅಷ್ಟೇ. ಬಣ್ಣದ ಗೋಳಗಳ ಬಗ್ಗೆ ಅವರು ತಿಳಿಸುವುದಿಲ್ಲ, ಚೇತನದತ್ತ ಅವರ ಗಮನ. ಸ್ವಸಮ್ಮೋಹನದ ಬಗ್ಗೆಯೂ ಡಾ ವೈಸ್ ತಿಳಿಸುತ್ತಾರೆ; ಮೆಡಿಟೇಷನ್, ಧ್ಯಾನ, ಏಕಾಗ್ರತೆಯನ್ನು ಅಭ್ಯಸಿಸಲು ಹೇಳುತ್ತಾರೆ. ನಿದ್ದೆ-ಎಚ್ಚರಗಳ ನಡುವಿನ ಸ್ಥಿತಿಯಲ್ಲಿನ ಕನಸುಗಳನ್ನು ನೆನಪಿರಿಸಿಕೊಂಡು ಅವನ್ನು ಗುರುತು ಹಾಕಿಕೊಂಡು ಒಂದು ಸೂತ್ರದಲ್ಲಿ ಹೆಣೆಯಲಾಗುತ್ತದೆಯೋ ನೋಡಿ, ಅನ್ನುತ್ತಾರೆ. ಅಗಲಿದ ಆತ್ಮೀಯರಿಂದ ಸಂದೇಶಗಳು ಬರಬಹುದು, ಬರುತ್ತವೆ; ಮನಸ್ಸು ಮುಕ್ತವಾಗಿರಲಿ, ಎಂದು ಸಾರುತ್ತಾರೆ.

ಇನ್ನು ಒಂದು ವಾರ ನೀವೇನು ಮಾಡುತ್ತೀರಿ? ಬರೆದು ತಿಳಿಸಿ. ಮುಂದಿನ ಸೋಮವಾರ ಸಿಗುತ್ತೇನೆ.